ಶಿವಮೊಗ್ಗ ನಗರದ ಹೊನ್ನಾಳಿ ಮುಖ್ಯರಸ್ತೆಯ ಪೇಸ್ ಕಾಲೇಜು ಸಮೀಪ ಎಟಿಎಂ ಹಣ ಸಾಗಣೆ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಅಪಘಾತದಲ್ಲಿ ವಾಹನ ಚಾಲಕ ಸತಿಶ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ, ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿರುವುದನ್ನು ಗಮನಿಸಿದ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ 112 ಪೊಲೀಸರು ವಾಹನವನ್ನು ಪರಿಶೀಲಿಸಿದ್ದು, ಅದರಲ್ಲಿ ಹಣವಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಹಾಗೂ ಚಾಲಕ ಏಕೆ ಸ್ಥಳದಿಂದ ಪರಾರಿಯಾದ ಎಂಬ ಕುರಿತು ತನಿಖೆ ಮುಂದುವರಿದಿದೆ.
ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.